ಸುಸ್ವಾಗತ

ಕೆಳದಿ ಕವಿ ಮನೆತನದ ಒಂದು ವಿಸ್ತೃತ ದರ್ಶನಕ್ಕೆ ನಿಮಗೆಲ್ಲಾ ಆತ್ಮೀಯ ಸ್ವಾಗತ
- KAVI SURESH, SHIMOGA

Tuesday, November 23, 2010

ಕೆಳದಿ ಕವಿ ಮನೆತನದ ಬಂಧು-ಬಳಗದ ವಾರ್ಷಿಕ ಸಮ್ಮೇಳನಗಳ ವರದಿ

ಕೆಳದಿ ಕವಿ ಮನೆತನದ ಬಂಧು-ಬಳಗದ ವಾರ್ಷಿಕ ಸಮ್ಮೇಳನದ ವರದಿ
     ಕವಿ ಮನೆತನ ಎಂದು ಹೆಸರು ಬರಲು ಕಾರಣನಾದ ಕೆಳದಿ ಸಂಸ್ಥಾನದ ಆಸ್ಥಾನ ಕವಿ ಲಿಂಗಣ್ಣನನ್ನು ಕವಿ ಮನೆತನದ ಒಂದನೆಯ ಪೀಳಿಗೆ ಎಂದು ಪರಿಗಣಿಸಿದರೆ, ಪ್ರಸ್ತುತ ಮೊದಲಿನ ಆರು ಪೀಳಿಗೆಯವರು ಈಗ ಬದುಕಿಲ್ಲ. ಏಳರಿಂದ ಹತ್ತನೆಯ ಪೀಳಿಗೆಯ ಕುಟುಂಬಗಳವರು ಈಗ ಇದ್ದು ಹನ್ನೊಂದನೆಯ ಪೀಳಿಗೆ ಆಗಮನ ಸನ್ನಿಹಿತವಾಗಿದೆ. ಸುಮಾರು ಮುನ್ನೂರು ವರ್ಷಗಳ ಇತಿಹಾಸವಿರುವ ಈ ಮನೆತನದ ಕುಟುಂಬಗಳ ಸದಸ್ಯರುಗಳು ಹಲವೆಡೆ ಚದುರಿ ಹೋಗಿದ್ದು, ಅವರುಗಳನ್ನು ಗುರುತಿಸಿ ಒಟ್ಟುಗೂಡಿಸಿ ವರ್ಷಕ್ಕೆ ಒಮ್ಮೆಯಾದರೂ ಒಟ್ಟಿಗೆ ಸೇರಿಸಿ ಸಮಾವೇಶ ನಡೆಸುವ ಕಾರ್ಯ ೨೦೦೭ ರಲ್ಲಿ ಚಾಲನೆ ಪಡೆಯಿತು. ಪರಸ್ಪರ ಪರಿಚಯವೇ ಇಲ್ಲದ, ಸಂಪರ್ಕ ಸಹ ಇಲ್ಲದಿದ್ದ ಬಂಧುಗಳನ್ನು  ಒಟ್ಟುಗೂಡಿಸಿ ೨೮-೦೧-೦೭ರಲ್ಲಿ ಕವಿ ಸುರೇಶರ ಮನೆಯಲ್ಲಿ ನಡೆದ ಪ್ರಥಮ ಸಮ್ಮೇಳನ ಅವಿಸ್ಮರಣೀಯ, ಅನುಪಮವಾಗಿದ್ದು, ಇದಕ್ಕಾಗಿ ಕವಿ ಸುರೇಶರವರು ಪಟ್ಟ ಪರಿಶ್ರಮ ಸಾರ್ಥಕವಾಗಿದೆ. ೨೫-೧೨-೨೦೦೭ರಲ್ಲಿ ಕೆಳದಿಯಲ್ಲಿ ದ್ವಿತೀಯ ವಾರ್ಷಿಕ ಸಮ್ಮೇಳನ ಕೆಳದಿ ರಾಮಮೂರ್ತಿ ಸಹೋದರರ ಪ್ರಾಯೋಜಕತ್ವದಲ್ಲಿ ನಡೆಯಿತು.

ಪ್ರಥಮ ವಾರ್ಷಿಕ ಸಮಾವೇಶ - ೨೮-೦೧-೨೦೦೭
     'ನಾವು - ನಮ್ಮವರು' ಶೀರ್ಷಿಕೆಯಲ್ಲಿ ಕವಿ ಸುರೇಶರ ಶಿವಮೊಗ್ಗದ ಸ್ವಗೃಹದಲ್ಲಿ ಕವಿ ಲಿಂಗಣ್ಣ ವೇದಿಕೆಯಲ್ಲಿ ಬೆಳಿಗ್ಗೆ  ೮-೦೦ ಗಂಟೆಗೆ ಆರಂಭವಾದ ಕಾರ್ಯಕ್ರಮಗಳು ಸಾಯಂಕಾಲ ೬-೦೦ ಗಂಟೆಯವರೆಗೆ ನಡೆದು ಉತ್ತಮ ಮೇಲ್ಪಂಕ್ತಿ ಹಾಕಿಕೊಟ್ಟಿತೆಂದರೆ ಉತ್ಪ್ರೇಕ್ಷೆಯಲ್ಲ. ಸುಮಾರು ೧೫೦ ಸದಸ್ಯರುಗಳು ಪೂರ್ಣಕಾಲ ಸಕ್ರಿಯವಾಗಿ ಪಾಲ್ಗೊಂಡ ಈ ಸಮಾವೇಶ ಕೆಳಕಂಡ ಭಾವನಾತ್ಮಕ ಕ್ಷಣಗಳಿಗೆ. ಕಾರ್ಯಗಳಿಗೆ ಸಾಕ್ಷಿಯಾಯಿತು.
                                                          ಸಮಾವೇಶ ನಡೆದ ಕವಿ ಸುರೇಶರ ಸ್ವಗೃಹ
೧. ಅರುಣ ಪಾರಾಯಣ: ಅನೇಕ ವರ್ಷಗಳ ನಂತರ ಪ್ರಥಮ ಬಾರಿಗೆ ಬಂಧುಗಳ ಮಿಲನವಾಗುತ್ತಿರುವ ನಿಮಿತ್ತ ಶ್ರೀ ಸಾ.ಕ. ಕೃಷ್ಣಮೂರ್ತಿ, ಡಾ. ಕೃಷ್ಣಜೋಯಿಸ್ ಮತ್ತು ಶ್ರೀ ರಾಮಾಜೋಯಿಸ್ ರವರು ಅರುಣಪಾರಾಯಣ ಮಾಡಿದರು.
೨. ಪ್ರಾಸ್ತಾವಿಕ: ಸಮಾವೇಶದ ಪ್ರಸ್ತುತತೆ, ಕಾರ್ಯಕ್ರಮಗಳ ವಿವರ ಕುರಿತು ಕ.ವೆಂ. ನಾಗರಾಜರಿಂದ ಪ್ರಾಸ್ತಾವಿಕ ಭಾಷಣ ಹಾಗೂ ಗಣ್ಯರ ಪರಿಚಯ
                                     * * * * *  * * * * *

೩. ಗಣ್ಯರು ಹಾಗೂ ಕುಟುಂಬದ ಹಿರಿಯರಿಂದ ಜ್ಯೋತಿ ಬೆಳಗುವುದು - ವೇದಘೋಷದೊಂದಿಗೆ

೪. ಬಂಧುಗಳ ಪರಸ್ಪರ ಪರಿಚಯ 
೫. ಪುಸ್ತಕ ಬಿಡುಗಡೆ: ಕವಿ ಸುರೇಶ ಸಂಪಾದಿಸಿದ 'ಹಳೆ ಬೇರು - ಹೊಸ ಚಿಗುರು' ಪುಸ್ತಕ ಬಿಡುಗಡೆ ಮಾಡಿದ ಶ್ರೀ ಕೂಡಲಿ ಜಗನ್ನಾಥ ಶಾಸ್ತ್ರಿಗಳಿಂದ ಸ್ತುತ್ಯಾರ್ಹ ಕಾರ್ಯದ ಪ್ರಶಂಸೆ


೬. ವಸ್ತು ಪ್ರದರ್ಶನ: ಕೆಳದಿ ಗುಂಡಾ ಜೋಯಿಸರು ಉದ್ಘಾಟಿಸಿದ ಕವಿ ಮನೆತನದ ಹಿಂದಿನ ಮತ್ತು ಈಗಿನ ಪೀಳಿಗೆಗಳ ಸಾಧನೆ ಪರಿಚಯಿಸುವ ಪುಟ್ಟ ವಸ್ತು ಪ್ರದರ್ಶನ ಎಲ್ಲರ ಗಮನ ಸೆಳೆಯಿತು. ಪರಸ್ಪರ ಅಂತಃಕರಣ ಮತ್ತು ನಿರಂತರ ಸಂಪರ್ಕದ ಬಗ್ಗೆ ಗುಂಡಾಜೋಯಿಸರ ಮಾತುಗಳು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

೭. ಸನ್ಮಾನ: 'ಹಳೇ ಬೇರು ಹೊಸಚಿಗುರು' ಪುಸ್ತಕ ರಚನೆಗೆ ಸಹಕರಿಸಿದ ಮಹನೀಯರನ್ನು ಸನ್ಮಾನಿಸಲಾಯಿತು. ಕವಿ ಕುಟುಂಬಗಳ ಹಿರಿಯರಾದ ಶ್ರೀಯುತರಾದ ಸಾ.ಕ.ಕೃಷ್ಣಮೂರ್ತಿ, ರಾಮರಾವ್, ನಾಗರಾಜಭಟ್ಟ, ರಾಮಾಜೋಯಿಸ್, ವಿನೋದಮ್ಮ, ಸೀತಾಲಕ್ಷ್ಮಮ್ಮ, ಸುಬ್ಬಲಕ್ಷ್ಮಮ್ಮ, ಪದ್ಮಾವತಮ್ಮ, ಗಿರಿಜಮ್ಮ, ರಾಮಮೂರ್ತಿ, ಹರಿಹರದ ರಾಮರಾವ್ ಮೊದಲಾದವರನ್ನು ಯಥೋಚಿತವಾಗಿ ಸನ್ಮಾನಿಸಲಾಯಿತು.
     ಕವಿ ಮನೆತನದ ಸದಸ್ಯರ ಪೈಕಿ ಅತ್ಯಂತ ಹಿರಿಯರಾದ ಶ್ರೀ ಕವಿ ವೆಂಕಟಸುಬ್ಬರಾವ್ ಮತ್ತು ಶ್ರೀಮತಿ ಸೀತಮ್ಮ ದಂಪತಿಗಳನ್ನು ಅವರ ಮಕ್ಕಳು ಸನ್ಮಾನಿಸಿ ಗೌರವ, ಪ್ರೀತಿ, ವಾತ್ಸಲ್ಯ, ಕೃತಜ್ಞತೆಗಳನ್ನು ಸಲ್ಲಿಸಿದ್ದು ತುಂಬಾ ಭಾವನಾತ್ಮಕ ವಾಗಿತ್ತು. ಸನ್ಮಾನಿತರುಗಳು ಹಾಗೂ ಗಣ್ಯರು ಹೃದಯ ಮುಟ್ಟುವ ಮಾತುಗಳನ್ನಾಡಿದರು.




     ೮. ವಿಚಾರ ವಿನಿಮಯ: ಮುಂದಿನ ಸಮಾವೇಶ, ಕೈಗೊಳ್ಳಬಹುದಾದ ಕಾರ್ಯಗಳ ಬಗ್ಗೆ ಮುಕ್ತವಾಗಿ ಚರ್ಚಿಸಲಾಯಿತು.     ಕಾರ್ಯಕ್ರಮದಲ್ಲಿ ಶ್ರೀಮತಿ ಕಾಶಿಬಾಯಿ, ಅಂಬಿಕಾ, ದೀಪಕ್, ಮುಂತಾದವರು ತಮ್ಮ ಸುಮಧುರ ಗಾಯನದಿಂದ ರಂಜನೆ ನೀಡಿದರು. ಒಳ್ಳೆಯ ಊಟೋಪಚಾರದ ವ್ಯವಸ್ಥೆ ಮಾಡಲಾಗಿತ್ತು.  ಪ್ರತಿ ವರ್ಷ ಡಿಸೆಂಬರ್ ತಿಂಗಳ ೨೫ ರಂದು ಇದೇ ರೀತಿ ಒಟ್ಟಿಗೆ ಸೇರಬೇಕೆಂದು ನಿರ್ಧರಿಸಲಾಯಿತು. ಎಲ್ಲರಿಗೂ ನೆನಪಿನ ಕಾಣಿಕೆಗಳನ್ನು ನೀಡಲಾಯಿತು.
-ಕವಿನಾಗರಾಜ್.(ಡಿಸೆಂಬರ್, 2008ರ 'ಕವಿಕಿರಣ' ಪತ್ರಿಕೆಯಲ್ಲಿ ಪ್ರಕಟಿತ ವರದಿ ಆಧರಿಸಿ).

No comments:

Post a Comment